ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಸ್ನಾನಕ್ಕೆ ಸಮುದ್ರಕ್ಕೆ ಇಳಿದ ನಾಲ್ವರು ಯುವಕರ ಪೈಕಿ ಇಬ್ಬರು ಸಮುದ್ರ ಪಾಲಾಗಿದ್ದಾರೆ.
ಸಮುದ್ರದಲ್ಲಿ ಕಣ್ಮರೆಯಾದವರನ್ನು ಚೆಂಗನ್ನೂರು ನಿವಾಸಿಗಳಾದ 20 ವರ್ಷದ ಅಂಕಿತ್ ಹಾಗೂ 20 ವರ್ಷದ ಅಪ್ಪುಟಿ ಅಬ್ರಹಾಂ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ನಾಲ್ವರು ಸ್ನೇಹಿತರು ಪಳ್ಳಿಕೆರೆ ಕಡಲತೀರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆ ಸಮುದ್ರದಲ್ಲಿ ಈಜಲು ಇಳಿದಿದ್ದರು. ಈ ವೇಳೆ ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ನಾಲ್ವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿಯ ನೆರವಿನಿಂದ ಇಬ್ಬರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಇನ್ನಿಬ್ಬರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ರಕ್ಷಿಸಲ್ಪಟ್ಟ ಇಬ್ಬರು ಯುವಕರು ಪ್ರಸ್ತುತ ಕೋಸ್ಟಲ್ ಪೊಲೀಸ್ ಠಾಣೆಯಲ್ಲಿ ಇದ್ದು, ಅವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಕಣ್ಮರೆಯಾದ ಅಂಕಿತ್ ಮತ್ತು ಅಪ್ಪುಟಿ ಅಬ್ರಹಾಂ ಅವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ಇತರ ರಕ್ಷಣಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ.
ಘಟನೆಯ ಕುರಿತು ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


