ಬೀದರ್: ಜನಪ್ರಿಯ ಹಾಸ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಕಿರುತೆರೆ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಜಾಲತಾಣದ ರೀಲ್ಸ್ಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಸಿದ್ದಾರ್ಥ ಪರಸನೂರು ಅವರ ಮೃತದೇಹ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಪತ್ತೆಯಾಗಿದೆ.

ಸಿದ್ದಾರ್ಥ ಅವರ ಸಾವಿನ ಸುದ್ದಿ ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬ ಸದಸ್ಯರಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ಪರಿಗಣಿಸಿರುವ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಸಾವಿನ ಕುರಿತು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

ಹುಮನಾಬಾದ್ನ ಟೀಚರ್ ಕಾಲನಿಯ ನಿವಾಸಿಯಾಗಿದ್ದ ಸಿದ್ದಾರ್ಥ ಅವರು ಸುಮಾರು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪಟ್ಟಣದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮೃತದೇಹದ ಸ್ಥಿತಿಯನ್ನು ಗಮನಿಸಿದಾಗ ಇದು ಸಹಜ ಸಾವು ಅಲ್ಲ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಕರೆಂಟ್ ತಗುಲಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ನಿಖರ ಸಾವಿನ ಕಾರಣ ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ನಂತರವೇ ತಿಳಿಯಬೇಕಿದೆ.
ಈ ಕುರಿತು ಹುಮನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಸಿದ್ದಾರ್ಥ ಅವರ ಸಾವಿನ ಹಿಂದಿನ ನಿಜಾಂಶವನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.





