ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಅಮೃತೇಶ್ವರಿ ಸರ್ಕಲ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ದುರ್ಘಟನೆ ರವಿವಾರ ಸಂಜೆ ನಡೆದಿದೆ.

ಮೃತರನ್ನು ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ. ಇವರು ಬ್ರಹ್ಮಾವರ ಅರೂರು ಮೂಲದವರಾಗಿದ್ದಾರೆ.
ಮಾಹಿತಿಯ ಪ್ರಕಾರ, ಸತೀಶ್ ಆಚಾರ್ ಅವರು ಕೋಟದ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ, ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಅಜಾಗರೂಕತೆಯಿಂದ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಸತೀಶ್ ಆಚಾರ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜೀವನ್ ಮಿತ್ರ ಆ್ಯಂಬುಲೆನ್ಸ್ ಸಿಬ್ಬಂದಿಗಳಾದ ನಾಗರಾಜ್ ಪುತ್ರನ್ ಹಾಗೂ ಕಿಶೋರ್ ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರು.

ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕೋಟ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


