ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬಂಟ್ವಾಳ, ಉಳ್ಳಾಲ, ಸುರತ್ಕಲ್ ಹಾಗೂ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯಾದ್ಯಂತ ಮಧ್ಯಂತರವಾಗಿ ಮಳೆ ಸುರಿದಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ ಜೂನ್ 24ರಿಂದ 26ರವರೆಗೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಬಿರುಸಿನ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದೇ ವೇಳೆ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 27.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ವಾಡಿಕೆಗಿಂತ 1.5 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗಿದೆ. ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ವಾಡಿಕೆಗಿಂತ 0.9 ಡಿಗ್ರಿ ಸೆಲ್ಸಿಯಸ್ ಇಳಿಕೆ ಕಂಡಿದೆ.


