ಬೆಂಗಳೂರು: ಪಿಜಿಯೊಳಗೆ ಕಾಲು ತೊಳೆದ ವಿಚಾರವಾಗಿ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಗರದ ರಾಮಮೂರ್ತಿ ನಗರ ಸಮೀಪದ ಕಸ್ತೂರಿನಗರದಲ್ಲಿ ಸೋಮವಾರ ಸಂಜೆ ನಡೆದಿದೆ.

ಕಸ್ತೂರಿನಗರ ಮುಖ್ಯರಸ್ತೆಯಲ್ಲಿರುವ ಲಕ್ಷ್ಮೀ ನರಸಿಂಹ ಪಿಜಿಯ ಮಾಲಿಕ ಮಾದೇವ್ ಮಾಟ್ಲೆ (37) ಮೃತರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿ ರಾಕೇಶ್ (21) ಹಾಗೂ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿ ಡಾನ್ ಬ್ರೆಟ್ ಸನ್ (20) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಸಂಜೆ ಸುಮಾರು 6.30ರ ವೇಳೆಗೆ ಆರೋಪಿಗಳು ಪಿಜಿ ಆವರಣದ ನಲ್ಲಿಯಲ್ಲಿ ಕಾಲು ತೊಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಇಲ್ಲಿ ಕಾಲು ತೊಳೆಯಬಾರದು ಎಂದು ತಿಳಿಸಿದಾಗ ವಿದ್ಯಾರ್ಥಿಗಳೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಬಳಿಕ ಸ್ಥಳಕ್ಕೆ ಬಂದ ಪಿಜಿ ಮಾಲಿಕ ಮಾದೇವ್ ವಿದ್ಯಾರ್ಥಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಬ್ಯಾಟ್ನಿಂದ ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ ಎನ್ನಲಾಗಿದ್ದು, ನಂತರ ಆರೋಪಿಗಳು ಅದೇ ಬ್ಯಾಟ್ ಕಸಿದುಕೊಂಡು ಮಾಲಿಕನ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಮಾದೇವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಭದ್ರತಾ ಸಿಬ್ಬಂದಿ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


