ಉಪ್ಪಿನಂಗಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವವರು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಗಿರೀಶ್ ಆಗಿದ್ದು, ಅವರು ಪಿಕಪ್ ವಾಹನ ಚಾಲಕರಾಗಿದ್ದಾರೆ.

ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯದಿಂದ ಕೊಕ್ಕಡ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪೆರಿಯಶಾಂತಿ ಸಮೀಪ ತಮ್ಮ ವಾಹನವನ್ನು ಕೊಕ್ಕಡ ಕಡೆಗೆ ತಿರುಗಿಸುತ್ತಿದ್ದರು. ಇದೇ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ರಿಜೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಗಿರೀಶ್ ಅವರಿಗೆ ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


