ಮಂಗಳೂರು: ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ 2021ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ತೆಕ್ಕಿಲ್ ನಿವಾಸಿ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನ್ಯಾಯಾಲಯವು ಈಗಾಗಲೇ ವಾರೆಂಟ್ ಜಾರಿಗೊಳಿಸಿತ್ತು.

ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಜೂನ್ 24ರಂದು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




