ಮಂಗಳೂರು: ನಗರದ ಸೂಟರ್ಪೇಟೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಬಳಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರೂ, ಈ ವೇಳೆ ಒಬ್ಬ ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಗೋರಖ್ಪುರ ಮೂಲದ ರವಿ ಬರ್ವ ಹಾಗೂ ಮಹಮ್ಮದ್ ಸಾಹಿಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಾಗಲಕೋಟೆ ಮೂಲದ ಆಲ್ತಾಫ್ ಹುಸೇನ್ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಶುಕ್ರವಾರ ಬೆಳಗ್ಗೆ ಆರೋಪಿಗಳು ನಗರದ ಬಸ್ ನಿಲ್ದಾಣ ಪ್ರದೇಶದಲ್ಲಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದರು. ಬಳಿಕ ಆರೋಪಿಗಳನ್ನು ಠಾಣೆಗೆ ಕರೆತರುತ್ತಿದ್ದ ವೇಳೆ ಆಲ್ತಾಫ್ ಹುಸೇನ್ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪ್ರಸ್ತುತ ಆರೋಪಿಯ ಪತ್ತೆಗಾಗಿ ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


