Breaking
29 Jun 2026, Mon

ಬಂಟ್ವಾಳ: ಕರ್ತವ್ಯಕ್ಕೆ ಅಡ್ಡಿ ಆರೋಪ; ಬಸ್ ಚಾಲಕ–ಮಹಿಳೆ ನಡುವೆ ದೂರು-ಪ್ರತಿದೂರು ದಾಖಲು

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರವಿವಾರ ಮಹಿಳೆಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬಂಧಿಸಿ ಮಹಿಳೆಯೂ ಬಸ್ ಚಾಲಕನ ವಿರುದ್ಧ ಪ್ರತಿದೂರು ನೀಡಿದ್ದಾರೆ.

ಕಡೂರಿನಿಂದ ಉಜಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಂಟ್ವಾಳ ಬೈಪಾಸ್ ತಲುಪಿದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಬಸ್ ಚಾಲಕ ವಸಂತ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಬಿಸಿ ರೋಡ್ ಬಳಿ ಬಸ್ ನಿಲ್ಲಿಸಿದ್ದ ವೇಳೆ ಮಹಿಳೆಯೊಬ್ಬರು ಕಾರನ್ನು ಬಸ್‌ಗೆ ಅಡ್ಡವಾಗಿ ನಿಲ್ಲಿಸಿ ಬೈದಿದ್ದಾರೆ, ಕಾರಿಗೆ ಢಿಕ್ಕಿ ಹೊಡೆದಿದ್ದೀರಿ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಮಹಿಳೆಯೂ ಬಸ್ ಚಾಲಕನ ವಿರುದ್ಧ ದೂರು ನೀಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎರಡೂ ದೂರುಗಳ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *