ಉಡುಪಿ: ಶೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಸೈಬರ್ ವಂಚಕರ ಬಲೆಗೆ ಬಿದ್ದು ವ್ಯಕ್ತಿಯೊಬ್ಬರು 50 ಲಕ್ಷ ರೂ.ಗೂ ಅಧಿಕ ಹಣ ಕಳೆದುಕೊಂಡಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ.

ಹೊರರಾಜ್ಯದ ಮೂಲದ ವ್ಯಕ್ತಿಯೊಬ್ಬರು ಪ್ರಸ್ತುತ ಉಡುಪಿಯಲ್ಲಿ ಉದ್ಯೋಗ ಮಾಡಿಕೊಂಡು ನೆಲೆಸಿದ್ದು, ಅವರ ವಾಟ್ಸ್ಆ್ಯಪ್ಗೆ ಬಂದಿದ್ದ ಹೂಡಿಕೆ ಸಂಬಂಧಿತ ಲಿಂಕ್ ಅನ್ನು ಸಂಪರ್ಕಿಸಿದ್ದರು. ಬಳಿಕ ಅಪರಿಚಿತರು ಶೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಹಂತ ಹಂತವಾಗಿ ವಿವಿಧ ಖಾತೆಗಳಿಗೆ 50 ಲಕ್ಷ ರೂ.ಗೂ ಅಧಿಕ ಹಣವನ್ನು ಹೂಡಿಕೆ ಮಾಡಿಸಿದ್ದಾರೆ.

ನಂತರ ಹೂಡಿಕೆ ಮಾಡಿದ ಹಣವನ್ನು ಹಿಂತೆಗೆದುಕೊಳ್ಳಲು ಪ್ರಯತ್ನಿಸಿದಾಗ, ಸಂಪರ್ಕದಲ್ಲಿದ್ದ ವ್ಯಕ್ತಿಗಳು ಸಂಪರ್ಕ ಕಡಿತಗೊಳಿಸಿದ್ದು, ತಾನು ಸೈಬರ್ ವಂಚನೆಗೆ ಒಳಗಾಗಿರುವುದು ಸಂತ್ರಸ್ತರಿಗೆ ತಿಳಿದುಬಂದಿದೆ.

ಈ ಸಂಬಂಧ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


