ಉಡುಪಿ: ಈಜಲು ತೆರಳಿದ್ದ ಇಬ್ಬರು ಸಹೋದರರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ಹೊಳೆಯಲ್ಲಿ ಜುಲೈ 12ರ ಭಾನುವಾರ ನಡೆದಿದೆ.

ಮೃತರನ್ನು ಹೊನ್ನಾವರ ನಿವಾಸಿಗಳಾದ ಮದನ್ ನಾಯಕ್ (16) ಹಾಗೂ ಹರ್ಷ ನಾಯಕ್ (18) ಎಂದು ಗುರುತಿಸಲಾಗಿದೆ. ಹರ್ಷ ಬ್ರಹ್ಮಾವರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು.

ಮಾಹಿತಿಯ ಪ್ರಕಾರ, ಹೊಳೆಗೆ ಅಡ್ಡಲಾಗಿ ನಿರ್ಮಿಸಿರುವ ಚೆಕ್ಡ್ಯಾಂ ಸಮೀಪ ಈಜುತ್ತಿದ್ದ ವೇಳೆ ಇಬ್ಬರೂ ಸುಮಾರು 15 ಅಡಿ ಆಳದ ನೀರಿಗೆ ಬಿದ್ದು ಮುಳುಗಿದ್ದಾರೆ. ಮಾಹಿತಿ ಪಡೆದ ಶ್ರೀ ಮಾರಿಕಾಂಬಾ ರಕ್ಷಣಾ ತಂಡದ ಗೋಪಾಲಗೌಡ ನೇತೃತ್ವದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದರು.

ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿಗೆ ರವಾನಿಸಲಾಗಿದೆ. ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಘಟನೆಯಿಂದ ಬ್ರಹ್ಮಾವರದ ಖಾಸಗಿ ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



