ಮಂಗಳೂರು: ರಾಷ್ಟ್ರೀಯ ಭದ್ರತಾ ದಳ (ಎನ್ಎಸ್ ಜಿ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸುತ್ತಿದೆ. ಇದರ ಭಾಗವಾಗಿ ಗುರುವಾರ ಬೆಳಗ್ಗೆ ಮಂಗಳೂರು ನಗರದ ವಿವಿಧ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿದ್ದು, ಇದು ಸಾರ್ವಜನಿಕರಲ್ಲಿ ಕುತೂಹಲ ಹಾಗೂ ಕೆಲವರಲ್ಲಿ ಆತಂಕಕ್ಕೆ ಕಾರಣವಾಯಿತು.

ನಗರದ ಹಲವು ಭಾಗಗಳಲ್ಲಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಸಂಚರಿಸುತ್ತಿರುವುದನ್ನು ಕಂಡ ಸಾರ್ವಜನಿಕರು ಗಾಬರಿಗೊಂಡು, ಇದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಘಟನೆಗಳೂ ವರದಿಯಾಗಿವೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಗಳು, ಎನ್ಎಸ್ಜಿ ಕಾರ್ಯದಕ್ಷತೆಯನ್ನು ಪರೀಕ್ಷಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅದರ ಭಾಗವಾಗಿಯೇ ಹೆಲಿಕಾಪ್ಟರ್ ಹಾರಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ರೀತಿಯ ಗಾಬರಿಗೆ ಒಳಗಾಗುವ ಅಗತ್ಯವಿಲ್ಲ. ಇದು ಪೂರ್ವನಿಯೋಜಿತ ಭದ್ರತಾ ಅಣಕು ಕಾರ್ಯಾಚರಣೆಯಾಗಿದ್ದು, ಸಾರ್ವಜನಿಕರ ಸಹಕಾರವನ್ನು ಅಧಿಕಾರಿಗಳು ಕೋರಿದ್ದಾರೆ.


