ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿದ ಆಘಾತವನ್ನು ತಾಳಲಾರದೆ ತಾಯಿಯೂ ಮೃತಪಟ್ಟ ಹೃದಯವಿದ್ರಾವಕ ಘಟನೆ ಧಾರವಾಡದ ತೇಜಸ್ವಿನಗರದಲ್ಲಿ ನಡೆದಿದೆ.

ಮೆಹಬೂಬಸಾಬ್ ನದಾಫ್ (47) ಬುಧವಾರ ಧಾರವಾಡದ ರಾಜೀವ್ ಗಾಂಧಿ ನಗರದ ಸಮೀಪ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂಜೆ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿತ್ತು.

ಈ ವೇಳೆ ಮಗನ ಮೃತದೇಹವನ್ನು ಮನೆಯಿಂದ ಅಂತ್ಯಕ್ರಿಯೆಗೆ ಕೊಂಡೊಯ್ಯುತ್ತಿದ್ದಾಗ, ಆಘಾತದಿಂದ ತಾಯಿ ಮುಗುಟಬಿ ನದಾಫ್ (68) ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೆಹಬೂಬಸಾಬ್ ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಾನಸಿಕವಾಗಿ ನೊಂದಿದ್ದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಗನ ಅಂತ್ಯಕ್ರಿಯೆ ಮುಗಿಸಿದ ಬಳಿಕ ತಡರಾತ್ರಿ ತಾಯಿಯ ಅಂತ್ಯಕ್ರಿಯೆಯನ್ನೂ ನೆರವೇರಿಸಲಾಯಿತು.

ಈ ಘಟನೆ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದ್ದು, ವಿಧಿಯಾಟಕ್ಕೆ ಜನರು ಕಂಬನಿ ಮಿಡಿದಿದ್ದಾರೆ. ಪ್ರಕರಣವು ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

