ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಸಾರ್ವಜನಿಕ ಆರೋಗ್ಯ ವಿಭಾಗದ ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ (25) ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವೀಣಾ ಗುರುವಾರ ರಾತ್ರಿ ಕೊಠಡಿಯಿಂದ ಹೊರಬರದೇ, ಊಟಕ್ಕೂ ಹಾಜರಾಗದ ಹಿನ್ನೆಲೆಯಲ್ಲಿ ಸಹಪಾಠಿಗಳು ವಾರ್ಡನ್ಗೆ ಮಾಹಿತಿ ನೀಡಿದ್ದರು. ಬಳಿಕ ಕೊಠಡಿ ಬಾಗಿಲು ತೆರೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದು ಎಂದು ಮೃತಳ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕಾಲು ನೆಲಕ್ಕೆ ತಾಗುವ ಸ್ಥಿತಿಯಲ್ಲಿತ್ತು. ಜೊತೆಗೆ ನೇಣಿಗೆ ಬಳಸಿದ ಬಟ್ಟೆ ಮಗಳದ್ದಲ್ಲ, ಮುಖದಲ್ಲೂ ಗಾಯಗಳಿದ್ದವು ಎಂದು ಆರೋಪಿಸಿರುವ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.


