Breaking
7 Aug 2026, Fri

ಶಿವಮೊಗ್ಗ: ಸಿಗಂದೂರುಗೆ ತೆರಳುತ್ತಿದ್ದ ಸ್ನೇಹಿತರ ಕಾರು ಪಲ್ಟಿ – ಆರೂ ಮಂದಿ ಗಾಯ, ಪೊಲೀಸರ ಸಮಯಪ್ರಜ್ಞೆಯಿಂದ ರಕ್ಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಶಿವಮೊಗ್ಗ ತಾಲೂಕಿನ ಚೋರಡಿ ಬ್ರಿಡ್ಜ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲ ಆರು ಮಂದಿಗೂ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಬೆಂಗಳೂರಿನಿಂದ ಸಿಗಂದೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಚೋರಡಿ ಬ್ರಿಡ್ಜ್ ಸಮೀಪ ಕಾರಿನ ಮೇಲಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಕಾರು ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಮೂರು ಬಾರಿ ಪಲ್ಟಿಯಾಗಿದ್ದು, ಸಂಪೂರ್ಣ ಜಖಂಗೊಂಡಿದೆ. ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳು ನೆರವಿಗಾಗಿ ಕೂಗಿಕೊಂಡಿದ್ದಾರೆ.


ಅದೇ ಸಮಯದಲ್ಲಿ ಕರ್ತವ್ಯದ ನಿಮಿತ್ತ ಶಿವಮೊಗ್ಗದತ್ತ ತೆರಳುತ್ತಿದ್ದ ಸಾಗರ ಪೇಟೆ ಪೊಲೀಸ್ ಠಾಣೆಯ ಎಎಸ್ಐ ಮೀರಾಬಾಯಿ ಹಾಗೂ ಪೊಲೀಸ್ ಸಿಬ್ಬಂದಿ ಅಪಘಾತವನ್ನು ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ತುರ್ತು ನೆರವು ಒದಗಿಸಿದರು.


ಘಟನೆಯ ಕುರಿತು ಪ್ರತಿಕ್ರಿಯಿಸಿದ ಎಎಸ್ಐ ಮೀರಾಬಾಯಿ, “ನಾವು ಘಟನಾ ಸ್ಥಳಕ್ಕೆ ಇನ್ನೂ ಒಂದು ಅಥವಾ ಎರಡು ನಿಮಿಷ ಮುಂಚಿತವಾಗಿ ತಲುಪಿದ್ದರೆ, ಪಲ್ಟಿಯಾದ ಕಾರು ನಮ್ಮ ವಾಹನಕ್ಕೂ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು,” ಎಂದು ತಿಳಿಸಿದ್ದಾರೆ.


ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿರುವುದು ನೆಮ್ಮದಿಯ ಸಂಗತಿಯಾಗಿದೆ.

Leave a Reply

Your email address will not be published. Required fields are marked *