ಮೂಡುಬಿದಿರೆ: ಮಿಜಾರ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಮಂಗಳವಾರ (ಆ.11) ಬೆಳಗ್ಗೆ ನಡೆದಿದೆ.

ಬೆಳಗ್ಗೆ ಸುಮಾರು 6.30ರ ವೇಳೆಗೆ ಘಟನೆ ಸಂಭವಿಸಿದ್ದು, ಮನೆಯಲ್ಲಿದ್ದ ಮೂಡುಬಿದಿರೆಯ ಖಾಸಗಿ ಕಾಲೇಜಿನ ವಾಚ್ಮೆನ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡಿದ್ದಾರೆ. ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಮೂವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


