ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಕರ್ನಾಟಕ ವತಿಯಿಂದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮವನ್ನು ಆಗಸ್ಟ್ 23ರಂದು ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ 79 ವೀರಯೋಧರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 79 ಗಣ್ಯ ಸಾಧಕರಿಗೆ ‘ಭಾರತ ಭೂಷಣ’, ‘ಭಾರತ ಸೇವಾರತ್ನ’ ಹಾಗೂ ‘ವಿದ್ಯಾ ಭೂಷಣ’ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

ಸ್ವಾತಂತ್ರ್ಯೋತ್ಸವ–2026ರ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪತ್ರ ಹಾಗೂ ಗೌರವ ಪ್ರದಾನ ಮಾಡುವ ಮೂಲಕ ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಲಾಗುತ್ತದೆ.

ವಿದ್ಯಾರ್ಥಿ ಸಾಧಕರಿಗೆ ಗೌರವ
ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿರುವ, ಭರತನಾಟ್ಯ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕು. ಶಾನ್ವಿ ಪೂಜಾರಿ ಮಡಂತ್ಯಾರ್ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಕರಾಟೆ ಪಟುವಾಗಿ ಗುರುತಿಸಿಕೊಂಡಿರುವ ಕು. ಶ್ರೇಯಸ್ ಪೂಜಾರಿ ಮಡಂತ್ಯಾರ್ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಗುವುದು.

ದೇಶಭಕ್ತಿ, ಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಗಣ್ಯರು, ಪ್ರಶಸ್ತಿ ಪುರಸ್ಕೃತರು, ಸಾಧಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.







