Breaking
14 Aug 2026, Fri

ಬಂಟ್ವಾಳದಲ್ಲಿ ಆಗಸ್ಟ್ 16ರಂದು ತಾಲೂಕು ಮಟ್ಟದ ಜಾನಪದ ವೈಭವ ಹಾಗೂ ಚೆನ್ನೆಮನೆ ಸ್ಪರ್ಧೆ

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಚೆನ್ನೆಮನೆ ಸ್ಪರ್ಧೆ ಆಗಸ್ಟ್ 16ರಂದು ಬಿ.ಸಿ.ರೋಡ್ನ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಯಿಂದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಆರಂಭವಾಗಲಿದ್ದು, ಬಂಟ್ವಾಳ ತಾಲೂಕಿನ ಆಯ್ದ 10 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಇದೇ ಸಂದರ್ಭದಲ್ಲಿ ಚೆನ್ನೆಮನೆ ಸ್ಪರ್ಧೆಯೂ ನಡೆಯಲಿದ್ದು, ಈಗಾಗಲೇ 100ಕ್ಕೂ ಅಧಿಕ ಸ್ಪರ್ಧಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.


ಸಭಾ ಕಾರ್ಯಕ್ರಮವನ್ನು ಉದ್ಯಮಿ ಪ್ರಕಾಶ್ ಕುಂಪಲ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಅವರು ಚೆನ್ನೆಮನೆ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ. ಉದ್ಯಮಿ ರಾಜಶೇಖರ ಕೋಟ್ಯಾನ್ ಅವರು ಜಾನಪದ ವೈಭವ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಗುರುಪ್ರಸಾದ್ ಎಂ. ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಾಂತ್ ಪುಂಜಾಲಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಅಪರಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಿರ್ವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ, ಉದ್ಯಮಿ ಅಶೋಕ್ ಪೂಜಾರಿ ಪಡೀಲ್, ಕಿರಣ್ ಕುಮಾರ್, ಕೇಶವ ಬಿ. ಹಾಗೂ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರಕೋಡಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

‘ಆಟಿಡೊಂಜಿ ಕೂಟ’ದ ಮೂಲಕ ತುಳುನಾಡಿನ ಸಾಂಸ್ಕೃತಿಕ ಪರಂಪರೆ, ಜಾನಪದ ಕಲೆ ಹಾಗೂ ಸಾಂಪ್ರದಾಯಿಕ ಆಟಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಕಾರ್ಯದರ್ಶಿ ಗೀತಾ ಜಗದೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *