ಬಂಟ್ವಾಳ ತಾಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಆ.10ರಂದು ‘ಅನುಗ್ರಹ’ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಡಗೆಬೆಳ್ಳೂರು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಸಂಕಪ್ಪ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ನಮ್ಮ ಹಿರಿಯರ ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಉತ್ತಮ ಮೌಲ್ಯಗಳನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಧರ್ಮಗುರು ವಂ. ಫಾ. ಪ್ರಮೋದ್ ಕ್ರಾಸ್ತಾ ಮಾತನಾಡಿ, ಯಾವುದೇ ಜಾತಿಭೇದವಿಲ್ಲದೆ ಬದುಕಲು ಕಲಿಸುವ ಜಾಗ ಶಾಲೆಯಾಗಿದೆ. ವಿದ್ಯಾರ್ಥಿಗಳು ಪರಸ್ಪರ ಹೊಂದಿಕೊಂಡು, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸಮಾಜದಲ್ಲಿ ಬದುಕುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.

ಶಾಲಾ ಮುಖ್ಯೋಪಾಧ್ಯಾಯ ವಂ. ಫಾ. ಮೆಲ್ವಿನ್ ಲೋಬೋ, ಸಹ ಮುಖ್ಯೋಪಾಧ್ಯಾಯಿನಿ ಗ್ಲಾಡಿಸ್ ಡಿಸೋಜ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಡೇನಿಯಲ್ ಡಿಸಿಲ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳ ಪೋಷಕರು ಹಾಗೂ ಸಂಘದ ಸದಸ್ಯರು ಆಟಿಯ ವಿವಿಧ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸಿ ತಂದಿದ್ದರು. ಔಷಧೀಯ ಸಸ್ಯಗಳ ಪ್ರದರ್ಶನವೂ ಏರ್ಪಡಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಪಾಯಸ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಮಾಸ್ಟರ್ ಪ್ರಜ್ವಲ್ ಸ್ವಾಗತಿಸಿದರು. ಕುಮಾರಿ ಮಾನ್ಸಿ ವಂದಿಸಿದರು. ಶಿಕ್ಷಕಿ ಚೇತನ ಕಾರ್ಯಕ್ರಮ ನಿರೂಪಿಸಿದರು.


