ಉಳ್ಳಾಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ವಲಸೆ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ಕೋಟೆಕಾರು ಬೀರಿಯದಲ್ಲಿ ಆ. 13ರಂದು ಮಧ್ಯಾಹ್ನ ನಡೆದಿದೆ.

ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗುತ್ತಿಗೆದಾರನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಹೈದರ್ (28) ಹಾಗೂ ಶಾಕಿಬ್ (22) ಎಂದು ಗುರುತಿಸಲಾಗಿದೆ.
ಕಟ್ಟಡದ ಮೇಲ್ಛಾವಣಿಗೆ ಶೀಟ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದ ವೇಳೆ ವೆಲ್ಡಿಂಗ್ ಮೆಷಿನ್ ತರಲು ತೆರಳಿದ್ದ ಶಾಕಿಬ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಮುಂದಾದ ಹೈದರ್ ಕೂಡ ಆಯತಪ್ಪಿ ಕಟ್ಟಡದ ಕೆಳಭಾಗದಲ್ಲಿದ್ದ ಎಲೆಕ್ಟ್ರಿಕ್ ಡಕ್ಟ್ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


