ಮುಡಿಪು: ಶ್ರೀ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮುಡಿಪು ವಿದ್ಯಾಸಂಸ್ಥೆಯಲ್ಲಿ ಆ.16ರಂದು ನಡೆದ ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಡಾ. ವಾಮನ ರಾವ್ ಬೇಕಲ್ ದಂಪತಿಗೆ ‘ಚೈತನ್ಯಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಸಾಹಿತ್ಯ ವೇದಿಕೆ ಹಾಗೂ ಪ್ರಕಾಶನದ ನೇತೃತ್ವದಲ್ಲಿ ನಡೆದ ಸಮ್ಮೇಳನದಲ್ಲಿ ಧರ್ಮದರ್ಶಿ ಹಾಗೂ ಮಾಜಿ ಕಸಾಪ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಗ್ರಂಥಾಲಯ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಬೇಕಲ್ ದಂಪತಿ ಪ್ರಮುಖ ಪಾತ್ರ ವಹಿಸಿದ್ದು, ಕೇರಳ–ಕರ್ನಾಟಕ ರಾಜ್ಯ ಚುಟುಕು ಸಾಹಿತ್ಯ ಪರಿಷತ್ತನ್ನು ಸಂಘಟಿಸಿ ಬೆಳೆಸುವಲ್ಲಿ ಶ್ರಮಿಸಿದ್ದಾರೆ.
ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಕೊಳಚಪ್ಪೆ ಗೋವಿಂದ ಭಟ್, ಹಿರಿಯ ಸಾಹಿತಿ ಕೆ.ವಿ. ಲಕ್ಷ್ಮಣ ಮೂರ್ತಿ, ಶಾಲಾ ಸಂಚಾಲಕ ಸುಬ್ರಹ್ಮಣ್ಯ ಭಟ್ ಕೊಡಕ್ಕಲು, ಕೇರಳ ರಾಜ್ಯ ಕಚುಸಾಪ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ, ಸಂಚಾಲಕಿ ಡಾ. ಶಾಂತಾ ಪುತ್ತೂರು ಹಾಗೂ ಕಥಾಬಿಂದು ಪ್ರಕಾಶನದ ಸುನೀತಾ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.






