ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ರಸ್ತೆ ಬದಿಗಳಲ್ಲಿ ಬೆಳೆದಿದ್ದ ಹುಲ್ಲು ಹಾಗೂ ಪೊದೆಗಳನ್ನು ಹುಲ್ಲು ಕಟಾವು ಯಂತ್ರದ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸ್ಪಂದಿಸಿದ್ದಾರೆ.

ಪುರಸಭೆಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅಜ್ಜಿಬೆಟ್ಟು ಪರಿಸರದ ನಾಗರಿಕರು ಶಾಸಕರಿಗೆ ಸಮಸ್ಯೆ ಕುರಿತು ದೂರು ನೀಡಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕರು ಕಾರ್ಮಿಕರನ್ನು ಕಳುಹಿಸಿ ಹುಲ್ಲು ಕಟಾವು ಯಂತ್ರದ ಮೂಲಕ ಪರಿಸರ ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಿರುವುದಾಗಿ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್, ಪುರಸಭೆಯಲ್ಲಿ ಯಾವುದೇ ಅನುದಾನದ ಕೊರತೆ ಇಲ್ಲ. ಆದರೆ ಕಾರ್ಮಿಕರ ಕೊರತೆ ಇದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕಡಿಮೆ ಸಂಖ್ಯೆಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಬಳಸಿಕೊಂಡು ಪುರಸಭೆಯ ಅನಗತ್ಯ ಖರ್ಚು ಮತ್ತು ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಇದರೊಂದಿಗೆ ಪುರಸಭೆಯ ಆದಾಯವನ್ನೂ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.




