ಮಂಗಳೂರು: ಸುಮಾರು 23 ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ನೀಡಿದ ನಿಖರ ಮಾಹಿತಿಯ ಮೇರೆಗೆ ಪೊಲೀಸರು ಲಾರಿಯನ್ನು ತಡೆದು ಗೋವುಗಳನ್ನು ರಕ್ಷಿಸಿದ ಘಟನೆ ಸೋಮವಾರ ಮುಂಜಾನೆ ಮಂಗಳೂರಿನ ಕೂಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಲಾರಿಯಲ್ಲಿ ಗೋವುಗಳನ್ನು ಕಾನೂನುಬಾಹಿರವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಸುಮಾರು 23 ಗೋವುಗಳು ಪತ್ತೆಯಾಗಿವೆ.

ಪೊಲೀಸರು ಗೋವುಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.







