ಕಕ್ಕೂರ್: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ಪೆಟ್ರೋಲ್ ಬಂಕ್ನ ಪಕ್ಕದ ಭಾಗಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಜಿಲ್ಲೆಯ ಕಕ್ಕೂರ್ ಸಮೀಪ ನಡೆದಿದೆ.

ಕಾಲಡಿಯಿಂದ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು 35 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ದ್ವಿಚಕ್ರ ವಾಹನ ಸವಾರನೊಬ್ಬ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಲಭಾಗಕ್ಕೆ ತಿರುವು ಪಡೆದಿದ್ದಾನೆ ಎನ್ನಲಾಗಿದೆ.

ದ್ವಿಚಕ್ರ ವಾಹನ ಸವಾರನನ್ನು ತಪ್ಪಿಸಲು ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿ ಬಸ್ ಅನ್ನು ಬದಿಗೆ ತಿರುಗಿಸಿದ್ದಾನೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕಕ್ಕೆ ಸಾಗಿ ಪೆಟ್ರೋಲ್ ಬಂಕ್ನ ಪಕ್ಕದ ಭಾಗಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ.

ಅಪಘಾತದ ತೀವ್ರತೆಗೆ ಹಲವು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ಗಳ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸಂಭವಿಸಿದ ವೇಳೆ ಪೆಟ್ರೋಲ್ ಬಂಕ್ ಆವರಣದಲ್ಲಿ ಸಾರ್ವಜನಿಕರು ಅಥವಾ ಇತರ ವಾಹನಗಳು ಇಲ್ಲದಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.


