ಮಂಗಳೂರು: ನಗರದ ಹೊರವಲಯದ ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬರು ತಾವು ವಾಸ್ತವ್ಯವಿದ್ದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ(ಆ.26) ನಡೆದಿದೆ.

ಕಡಬ ತಾಲೂಕಿನ ಕಾಣಿಯೂರು ನಿವಾಸಿ ಮನ್ವಿತ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಅವರು ಎಂಜಿನಿಯರಿಂಗ್ ತೃತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದು, ಅರ್ಕುಳದ ತುಪ್ಪೆಕಲ್ಲುವಿನಲ್ಲಿ ಕೊಠಡಿಯೊಂದರಲ್ಲಿ ವಾಸ್ತವ್ಯವಿದ್ದರು.

ಆ.26ರಂದು ಅವರು ತಮ್ಮ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಗೆ ಸಂಬಂಧಿಸಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.







