ಬಂಟ್ವಾಳ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಆ.30ರಂದು ರಾತ್ರಿ ನಡೆದಿದೆ.

ಮೃತರನ್ನು ರಶೀಕ್ ಎಂದು ಗುರುತಿಸಲಾಗಿದೆ. ರಶೀಕ್ ಅವರು ಮೆಲ್ಕಾರಿನಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಸ್ನೇಹಿತ ಅಬುಬಕ್ಕರ್ ಸಿದ್ದೀಕ್ ಅವರನ್ನು ಬೈಕ್ನಲ್ಲಿ ಕೂರಿಸಿಕೊಂಡು ಮುಡಿಪು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ರಾತ್ರಿ ಸುಮಾರು 8 ಗಂಟೆ ವೇಳೆಗೆ ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ ಬರುತ್ತಿದ್ದ ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ರಶೀಕ್ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆ ಹಾಗೂ ಹಣೆಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅಬುಬಕ್ಕರ್ ಸಿದ್ದೀಕ್ ಹಾಗೂ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ರಶೀಕ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಚಾಲಕ ಶಿವಾಜಿ ಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


