ಮೂಡಬಿದ್ರೆ: ಕರ್ನಾಟಕ ಸ್ಕ್ವೇಯ್ ಸಂಸ್ಥೆಯ ವತಿಯಿಂದ ಆಗಸ್ಟ್ 30ರಂದು ಮೂಡಬಿದ್ರಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಬಾಲಕಿಯರು ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

11 ವರ್ಷ ವಯೋಮಿತಿಯ -33 ಕೆ.ಜಿ. ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಯಿಶತುಲ್ ನಾಫಿಯ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಈ ಮೂಲಕ ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.

ಆಯಿಶತುಲ್ ನಾಫಿಯ ಅವರು ನೂರುಲ್ ಹುದಾ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮೊಹಮ್ಮದ್ ಫಹಾದ್ ಹಾಗೂ ಮಿಶ್ರಿಯ ದಂಪತಿಯ ಪುತ್ರಿಯಾಗಿದ್ದಾರೆ. ಇವರು ಸರ್ಫರಾಜ್ ಅವರಿಂದ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆ.

ಇದೇ ಸ್ಪರ್ಧೆಯಲ್ಲಿ 11 ವರ್ಷ ವಯೋಮಿತಿಯ -18 ಕೆ.ಜಿ. ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮರಿಯಮ್ ಸುಹ ಕೂಡ ಚಿನ್ನದ ಪದಕ ಗೆದ್ದಿದ್ದಾರೆ. ಅವರು ಸಹ ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಮರಿಯಮ್ ಸುಹ ಅವರು ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮುಬಾರಕ್ ಹಾಗೂ ಸಬಿಹಾ ದಂಪತಿಯ ಪುತ್ರಿಯಾಗಿದ್ದಾರೆ. ಇವರಿಗೂ ಸರ್ಫರಾಜ್ ಅವರಿಂದ ತರಬೇತಿ ದೊರೆಯುತ್ತಿದೆ.
ಇಬ್ಬರು ಬಾಲಕಿಯರ ಸಾಧನೆಗೆ ಪೋಷಕರು, ತರಬೇತುದಾರರು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲೂ ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.


