ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಇದೀಗ ಮಹತ್ವದ ಸ್ಪಂದನೆ ದೊರೆತಿದೆ.

ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯವಿದ್ದ ವನ್ಯಜೀವಿ ಮಂಡಳಿಯ ಅನುಮತಿ ದೊರೆತ ಹಿನ್ನೆಲೆಯಲ್ಲಿ, ಅನುಮತಿ ಪಡೆಯಲು ವಿಶೇಷ ಶ್ರಮವಹಿಸಿದ ಶಾಸಕ ಹರೀಶ್ ಪೂಂಜ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಕುತ್ಲೂರು ಭಾಗದ ಜನರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅವರು ನಿರಂತರವಾಗಿ ಪ್ರಯತ್ನ ನಡೆಸಿದ್ದರು. ಇದೀಗ ಅನುಮತಿ ದೊರೆತಿರುವುದರಿಂದ ಹಲವು ವರ್ಷಗಳಿಂದ ವಿದ್ಯುತ್ ಸೌಲಭ್ಯಕ್ಕಾಗಿ ಕಾಯುತ್ತಿದ್ದ ಅರಣ್ಯ ಪ್ರದೇಶದ ನಿವಾಸಿಗಳಲ್ಲಿ ಸಂತಸ ಮೂಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಸಾಧ್ಯವಾದಷ್ಟು ಬೇಗ ಅಗತ್ಯ ಅರಣ್ಯ ಕ್ಲಿಯರೆನ್ಸ್ ಪಡೆದು ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಕೇವಲ ತಾತ್ಕಾಲಿಕ ಪರಿಹಾರ ನೀಡುವುದಕ್ಕಿಂತ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3(2)ರ ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

“ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಜನರೂ ಮೂಲಭೂತ ಸೌಲಭ್ಯಗಳನ್ನು ಪಡೆಯುವುದು ಅವರ ಹಕ್ಕು. ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು.
ಈ ಭಾಗದ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವವರೆಗೆ ಪ್ರಯತ್ನ ಮುಂದುವರಿಯಲಿದೆ,” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.


