ಬೆಳ್ತಂಗಡಿ: ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಅವರಿಂದ ಎಂಡಿಎಂಎ ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಗುರುವಾಯನಕೆರೆ ಸರ್ಕಾರಿ ಪ್ರೌಢಶಾಲಾ ಮೈದಾನದ ಸಮೀಪದ ಗುಡ್ಡಗಾಡು ಹಾಗೂ ಅರಣ್ಯ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ಬಳಿ ನಾಲ್ವರು ವ್ಯಕ್ತಿಗಳು ನಿಂತಿರುವುದನ್ನು ಪೊಲೀಸರು ಗಮನಿಸಿದ್ದರು.
ಪೊಲೀಸರು ಸ್ಥಳಕ್ಕೆ ತೆರಳುತ್ತಿದ್ದಂತೆ ನಾಲ್ವರು ಪರಾರಿಯಾಗಲು ಯತ್ನಿಸಿದ್ದು, ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸಾರ್ (21) ಹಾಗೂ ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ.
ಅನ್ಸಾರ್ನಿಂದ ಸುಮಾರು ₹5,000 ಮೌಲ್ಯದ ಎಂಡಿಎಂಎ ಹಾಗೂ ಇಬ್ರಾಹಿಂನಿಂದ 29 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಸಂದರ್ಭದಲ್ಲಿ ಪರಾರಿಯಾಗಿರುವ ಹಮ್ಜತ್ ಕರಾರ್ ಮತ್ತು ನೌಶಾದ್ ಅವರಿಗಾಗಿ ಬೆಳ್ತಂಗಡಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.



