ಬಂಟ್ವಾಳ: ಸಮಾಜದಲ್ಲಿ ಧರ್ಮ ಜಾಗೃತಿಯ ಜೊತೆಗೆ ಸಾಮಾಜಿಕ ಸಂಘಟನೆ ಬೆಳೆಸಿಕೊಂಡು, ಎಲ್ಲರೂ ಒಟ್ಟಾಗಿ ಸನ್ಮಾರ್ಗದಲ್ಲಿ ಮುನ್ನಡೆಯಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರೇರಣೆಯಾಗಿದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಮಂಗಳವಾರ ನಡೆದ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್, ಬಂಟ್ವಾಳ ವಿದ್ಯಾನಿಕೇತನ ಸಂಸ್ಥೆಯ ಸಂಸ್ಥಾಪಕ ಸುರೇಶ್ ವಿ. ಬಾಳಿಗ ಶುಭ ಹಾರೈಸಿದರು.

ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಉಪಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಉಪಾಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ರಂಗ ಕಲಾವಿದ ಎಚ್.ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.



