ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಪಾಣೆಮಂಗಳೂರು ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ಸೆ.16ರಂದು ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನರೇಂದ್ರನಾಥ ಕುಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಮಾತನಾಡಿ, ಆರೋಗ್ಯವಂತ ಜೀವನ ನಡೆಸಲು ದುಶ್ಚಟಗಳಿಂದ ದೂರವಿರುವುದು ಅಗತ್ಯ. ಉತ್ತಮ ಆರೋಗ್ಯಕ್ಕಾಗಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಇದರಿಂದ ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಂದ ದೂರವಿರಲು ಸಾಧ್ಯ. ಪ್ರೌಢಾವಸ್ಥೆಯಲ್ಲಿ ಎದುರಾಗುವ ವಿವಿಧ ಸಮಸ್ಯೆ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ್ ಎಸ್., ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಗಂಗಾಧರ್ ಹಾಗೂ ಒಕ್ಕೂಟ ಸೇವಾ ಪ್ರತಿನಿಧಿ ಸುಲೋಚನ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




