ಬೆಂಗಳೂರು: ವಿವಾದಿತ ವಕ್ಸ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸಲು ಅನುಮತಿ ನೀಡಿರುವ ರಾಜ್ಯ ಸರಕಾರ ನಡೆಯನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ಪ್ರಕರಣ ಸುಪ್ರೀಂಕೋರ್ಟ್ ಪರಿಗಣನೆಯಲ್ಲಿ ಎಂಬುದನ್ನು ರಾಜ್ಯ ಸರಕಾರ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದೆ.

ಇಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ವೇಳೆ ಯಾವುದೇ ಕಾರಣಕ್ಕೂ ರಸ್ತೆ ತಡೆ ಮಾಡುವಂತಿಲ್ಲ ಎಂದು ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯ ಎ.ರಾಜೇಶ್ ಅವರು ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 72ರಲ್ಲಿಬರುವ ಪಡೀಲ್ನಿಂದ ಬಿ. ಸಿ ರೋಡ್ ರಸ್ತೆಯನ್ನು ಎ. 18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರ ವರೆಗೆ ಸಂಚಾರ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಪ್ರತಿಕ್ರಿಯೆ ನೀಡಿದೆ.

ವಕ್ಸ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಲು ರಾಜ್ಯ ಸರಕಾರದಿಂದ ಅನುಮತಿ ಪಡೆದಿದ್ದರೆ ಮಾತ್ರ ಪ್ರತಿಭಟನೆ ನಡೆಸಬಹುದಾಗಿದೆ.
ರಸ್ತೆ ನಿರ್ಬಂಧಿಸದೆ ಅನುಮತಿ ನೀಡಿರುವ ನಿರ್ದಿಷ್ಟ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಪ್ರಕರಣ ಸುಪ್ರೀಂಕೋರ್ಟ್ ಪರಿಗಣನೆಯಲ್ಲಿದೆ ಎಂಬುದನ್ನು ರಾಜ್ಯ ಸರಕಾರ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದಿದೆ.



