ಉಳ್ಳಾಲ: ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಪ್ರದೇಶದ ನೇತ್ರಾವತಿ ನದಿ ತೀರದ ಬಳಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಏ.16 ರಂದು ತಡರಾತ್ರಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಲ್ಕಿ ನಿವಾಸಿ ಹಾಗೂ ಆಟೋ ಚಾಲಕ ಪ್ರಭುರಾಜ್ (38), ಕುಂಪಲ ನಿವಾಸಿ ಹಾಗೂ ಇಲೆಕ್ಟ್ರೀಷಿಯನ್ ಮಿಥುನ್ (30), ಮತ್ತು ಮಂಗಳೂರು ನಿವಾಸಿ ಮಣಿ (30) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಕೇರಳದ ಪ್ಲೈವುಡ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ಥ ಯುವತಿ
ಹೌದು ಪಶ್ಚಿಮ ಬಂಗಾಳದ ಕುಚ್ ಬಿಹಾರ್ ಮೂಲದ ಈ 20 ಹರೆಯದ ಈ ಯುವತಿ ಕಳೆದ 2-3 ವರ್ಷಗಳಿಂದ ಕೇರಳದ ಪ್ಲೈವುಡ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು ಅನ್ನುವ ಮಾಹಿತಿ ಇದೆ. ಇತ್ತ ಮಂಗಳೂರಿನಲ್ಲಿ ಬೇರೆ ಸಂಸ್ಥೆಯಲ್ಲಿ ಕೆಲಸದ ಅವಕಾಶವಿದ್ದ ಕಾರಣ ಗೆಳೆಯನ ಜೊತೆ ಬುಧವಾರ ಬೆಳಗ್ಗೆ ಮಂಗಳೂರಿಗೆ ಬಂದಿದ್ದಾಳೆ. ಈ ವೇಳೆ ಗೆಳೆಯನ ಜೊತೆಗೆ ಜಗಳವಾಗಿ ಆತ ಈಕೆಯ ಮೊಬೈಲಿಗೆ ಹಾನಿ ಮಾಡಿದ್ದ. ಅದಕ್ಕೆ ಆಕೆ ರಿಪೇರಿಗೆಂದು ಆಟೋ ಹಿಡಿದು ಮೊಬೈಲ್ ಅಂಗಡಿಗೆ ತೆರಳಿದ್ದಾಳೆ.
ಆಕೆ ಸುಮಾರು 5 ರಿಂದ 6 ಗಂಟೆಗಳ ಕಾಲ ಆಕೆ ಆಟೋ ಡ್ರೈವರ್ ಜೊತೆಗೇ ಇದ್ದು ಜೊತೆಗೆ ಗೆಳೆತನ ಆಗಿದೆ. ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೈವರಿಗೆ ಹೇಳಿದ್ದು, ಆಟೋ ಡ್ರೈವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಬೇರೊಂದು ಜಾಗಕ್ಕೆ ಹೋಗುತ್ತಾರೆ.

ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು, ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಆಕೆಯ ಗಮನಕ್ಕೆ ಬಂದಿದೆ. ಯುವತಿ ತನ್ನ ಹೇಳಿಕೆಯಲ್ಲಿ ತನ್ನ ಮೇಲೆ ಅತ್ಯಾಚಾರ ಆಗಿರುವುದಾಗಿ ಹೇಳಿದ್ದಾಳೆ. ವೈದ್ಯಕೀಯ ಪರೀಕ್ಷೆ ಬಳಿಕ ಆರೋಪ ದೃಢಪಡಬೇಕಿದೆ.

ಉಳ್ಳಾಲದ ರೇಪ್ ಕೇಸ್ ವಿಚಾರದಲ್ಲಿ ಪೊಲೀಸ್ ಕಮಿಷನರ್ ಪ್ರತಿಕ್ರಿಯೆ
ಇನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಅವರು ಪ್ರತಿಕ್ರಿಯೆ ನೀಡಿದ್ದು ಬುಧವಾರ ತಡರಾತ್ರಿ 1.30ರ ಸುಮಾರಿಗೆ ತುರ್ತು ಕರೆ 112ಕ್ಕೆ ಈ ಕುರಿತು ಮಾಹಿತಿ ಬಂದಿದ್ದು, ತಕ್ಷಣವೇ ಹೊಯ್ಸಳ ತಂಡ ಸ್ಥಳಕ್ಕೆ ತೆರಳಿ ಯುವತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗುರುವಾರ ಬೆಳಗ್ಗೆ ಅವಳ ಹೇಳಿಕೆ ಪ್ರಕಾರ ನಿನ್ನೆ ರಾತ್ರಿ ಯಾರೋ ಅವಳಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ನಡೆಸಿದ್ದಾರೆ. ಪ್ರಜ್ಞೆ ಬಂದು ಅವಳು ಕೂಗಾಡಲು ಶುರು ಮಾಡಿದಾಗ ಆಕೆಯನ್ನು ಆರೋಪಗಳು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಆ ಬಳಿಕ ಸ್ಥಳೀಯರ ಸಹಾಯದೊಂದಿಗೆ ಯುವತಿ ಪೊಲೀಸರನ್ನು ಸಂಪರ್ಕಿಸಿದ್ದಾಳೆ.ಅವಳ ದೂರಿನ ಆಧಾರದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.



