ಮಂಗಳೂರು : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಲೆಮಾಗಳ ಒಕ್ಕೂಟದ ವತಿಯಿಂದ ಏ.18 ರಂದು ಮಂಗಳೂರಿನ ಅಡ್ಯಾರ್ ಷಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ವಿವಿಧ ರೀತಿಯ ಭಿತ್ತಿ ಪತ್ರ ಪ್ರದರ್ಶಿಸಿ ಕಾಯ್ದೆ ಹಿಂಪಡೆಯುವಂತೆ ಆಕ್ರೋಶ ವ್ಯಕ್ತಪಡಿಸಿದರು.

ನೇತ್ರಾವತಿ ನದಿಯಾಚೆಯ ಹರೇಕಳ, ಪಾವೂರು, ಕೊಣಾಜೆ, ಪಜೀರ್, ಅಂಬ್ಲಮೊಗರು, ಮುನ್ನೂರು, ಬೆಳ್ಮ, ಮಂಜನಾಡಿ, ಕಿನ್ಯ, ಕುರ್ನಾಡು, ಇರಾ ಗ್ರಾಮಗಳ ಜನರು ಹರೇಕಳ-ಅಡ್ಯಾರ್ ಸೇತುವೆ ಬಳಸಿ ಮತ್ತು ನೇತ್ರಾವತಿ ನದಿಯಲ್ಲಿ ದೋಣಿ ಮೂಲಕ ಶಾ ಗಾರ್ಡನ್ ಗೆ ಬಂದಿದ್ದರು.
ಜಿಲ್ಲೆಯ ಬಹುತೇಕ ಮುಸ್ಲಿಂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರತಿಭಟನೆ ಹಿನ್ನಲೆ ಬಿ.ಸಿ ರೋಡ್ ನಿಂದ ಅಡ್ಯಾರ್ ಷಾ ಮೈದಾನದವರೆಗೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು



