ಪುತ್ತೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಗುಂಡಿನ ದಾಳಿಯನ್ನು ಖಂಡಿಸಿ ಪುತ್ತೂರಿನ ನೆಹರು ನಗರದಲ್ಲಿ ಎಬಿವಿಪಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿದ್ಯಾರ್ಥಿಗಳು ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುತ್ತದೆ.
ಆದರೂ ಸಹ ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು, ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲುವೊಡ್ಡುತ್ತಿರುವುದು ಕಳವಳಕಾರಿಯದ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೆ ಒಳಗಾದವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪವನ್ನು ಸೂಚಿಸುತ್ತದೆ. ಈ ದುಃಖಕರ ಸಂದರ್ಭದಲ್ಲಿ ಭಾರತೀಯ ನಾಗರಿಕರೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಹಾಗೂ ಇಸ್ಲಾಮಿಕ್ ಭಯೋತ್ಪಾದನೆಯ ವಿರುದ್ಧ ಧ್ವನಿ ಎತ್ತಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉಗ್ರಗಾಮಿಗಳ ದಾಳಿಗೆ ಒಳಗಾಗಿರುವ ಕುಟುಂಬಗಳಿಗೆ ಸಾಂತ್ವನ ನೀಡಿ ಧೈರ್ಯ ತುಂಬಬೇಕು ಎಂದರು.

ಜೊತೆಗೆ ಭಾರತೀಯ ನೆಲದಲ್ಲಿ ಭಾರತೀಯ ನಾಗರೀಕರ ಮೇಲಿನ ಇಂತಹ ದಾಳಿಗಳು ಸಹಿಸಲು ಅಸಾಧ್ಯ ಹಾಗೂ ಭಯೋತ್ಪಾದಕರ ವಿರುದ್ಧ ಶೂನ್ಯ ಸಹಿಷ್ಣುತೆಯೊಂದಿಗೆ ಭಯೋತ್ಪಾದನೆಯನ್ನು ಮೂಲದಿಂದ ಕಿತ್ತೊಗೆಯಲು ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಎಂದು ಆಗ್ರಹಿಸಿದರು.
ಈ ವೇಳೆ ಪ್ರತಿಭಟನೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮರಾಠಿ, ನಗರ ಅಧ್ಯಕ್ಷರಾದ ಪ್ರಸಾದ್, ಅಭಯ್, ಸಿಂಚನ, ಸುಬ್ರಮಣ್ಯ, ಸುವಿತ್ ಶೆಟ್ಟಿ ಇತರರು ಉಪಸ್ಥಿತರಿದ್ದರು.


