ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 22 ರಂದು ಕರ್ನಾಟಕದ ಐದು ರೈಲು ನಿಲ್ದಾಣಗಳು ಸಹಿತ ದೇಶಾದ್ಯಂತ 103 ‘ಅಮೃತ್ ನಿಲ್ದಾಣ’ಗಳನ್ನು ರಾಜಸ್ಥಾನದ ಬಿಕಾನೇರ್ನಿಂದ ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಲಿದ್ದಾರೆ.
ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಈ ಐದು ನಿಲ್ದಾಣಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಇದರ ಜೊತೆಗೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
1,300 ಕ್ಕೂ ಹೆಚ್ಚು ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಪುನರಾಭಿವೃದ್ಧಿ ಮಾಡಲಾಗುತ್ತಿದೆ.
ಪ್ರಾದೇಶಿಕ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸಲು ಮತ್ತು ಎಬಿಎಸ್ಎಸ್ ಅಡಿಯಲ್ಲಿ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸಲಾಗಿದ್ದು, ತಡರಾತ್ರಿ ರೈಲು ಪ್ರಯಾಣ ಇದ್ದರೆ ಪ್ರಯಾಣಿಕರು ನಿಲ್ದಾಣದಲ್ಲಿಯೇ ತಂಗಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.



