ಬಂಟ್ವಾಳ: ಕೊಲೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧನ ಮಾಡುತ್ತೇವೆ. ಎಫ್ಐಆರ್ ನಲ್ಲಿ ಎರಡು ಹೆಸರಿದೆ, ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ, ಸದ್ಯ ತನಿಖೆ ಪ್ರಗತಿಯಲ್ಲಿದೆ, ಆ ಬಳಿಕ ಮಾಹಿತಿ ನೀಡುತ್ತೇವೆ ಅಲ್ಲಿಯವರೆಗೆ ಸಾರ್ವಜನಿಕರು ಗಾಳಿ ಸುದ್ದಿಗೆ ಕಿವಿ ಕೊಡದೆ ಶಾಂತಿ ಕಾಪಾಡಬೇಕು ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ.
ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಕುರಿತು ಬಂಟ್ವಾಳದಲ್ಲಿ ಮಾತನಾಡಿದ ಅವರು, ನಿನ್ನೆ ಮೂರು ಗಂಟೆಗೆ ಘಟನೆ ನಡೆದಿದ್ದು, ರೆಹಮಾನ್ ಮೃತಪಟ್ಟಿದ್ದಾರೆ. ಮಂಗಳೂರು ನಗರ ಹಾಗೂ ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ. ಅಂತ್ಯ ಸಂಸ್ಕಾರ ಶಾಂತಿಯುತವಾಗಿ ಮುಗಿದಿದೆ, ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು. ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕಾರವಾರದಿಂದ ಪೊಲೀಸರನ್ನು ಕರೆಸಿದ್ದೇವೆ. ಗಾಳಿ ಸುದ್ದಿಗೆ ಕಿವಿ ಕೊಡದೆ ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿನ ರಿವೇಂಜ್ ಪೋಸ್ಟ್ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಆದರೆ ಕೆಲವು ನಕಲಿ ಅಕೌಂಟ್ ಇದೆ, ವಿದೇಶದಲ್ಲೂ ಕೂತು ಮಾಡುತ್ತಾರೆ. ಅದೆಲ್ಲ ನಿಜ ಎಂದು ನಂಬಬೇಡಿ, ಪೊಲೀಸ್ ಇಲಾಖೆಯನ್ನು ನಂಬಿ ಎಂದು ಹೇಳಿದರು.ಇತ್ತೀಚಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು ಹೆಚ್ಚಾಗುತ್ತಿವೆ. ಅಂಥವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಮುಂದೆ ನುರಿತ ವಕೀಲರ ಮೂಲಕ ಶಿಕ್ಷೆಯಾಗುವಂತೆ ಮಾಡುತ್ತೇವೆ. ಹತ್ಯೆಯಾದ ವ್ಯಕ್ತಿ ಮರಳು ಕೆಲಸ ಮಾಡುತ್ತಿದ್ದ ಅಷ್ಟೇ. ಸದ್ಯ ಐದು ತಂಡಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.




