ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಬಿ.ಜಿ ಸುಬ್ಬಾಪುರಮಠ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಜಿ ಸುಬ್ಬಾಪುರಮಠ್ ಅವರು ಸರ್ವಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯನ್ನು ಕದಡುವವರ ವಿರುದ್ಧ ಪೊಲೀಸ್ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ.

ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದರು.
ಇದೇ ವೇಳೆ ಅವರು ಬಕ್ರೀದ್ ಹಬ್ಬವನ್ನು ಯಶಸ್ವಿಯಾಗಿ ನಡೆಸುವುದಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡ ಸೂಚನೆಗಳನ್ನು ಸಭೆಯ ಮುಂದಿಟ್ಟರು.

ಸಾರ್ವಜನಿಕರೊಬ್ಬರು ಮಾತನಾಡಿ ಸಮಾಜದ ಸ್ವಾಸ್ಥ್ಯ ಕದಡುವವರು , ದ್ವೇಷ ಭಾಷಣ ಮಾಡುವವರ ವಿರುದ್ಧ ಹಾಗೂ ಅಂತಹ ಕಾರ್ಯಕ್ರಮ ಸಂಘಟಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜೊತೆಗೆ ಬೀಟ್ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು ಎಂದರು.
ಈ ಸಂದರ್ಭ ಸಭೆಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸದಸ್ಯ , ಕಳಿಯ ಗ್ರಾಮ ಪಂಚಾಯತ್ ಸದಸ್ಯ ಕರೀಂ ಗೇರುಕಟ್ಟೆ , ಎಸ್ಡಿಪಿಐ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ , ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ಪ್ರವೀಣ್ ಗೌಡ ಕೊಯ್ಯೂರು , ಪ್ರಭಾಕರ ಶೆಟ್ಟಿ ಉಪ್ಪಡ್ಕ , ವಿವಿಧ ಸಂಘಟನೆಗಳ ಮುಖಂಡರುಗಳಾದ ಅಬ್ಬೊನು ಮದ್ದಡ್ಕ , ರಫೀಕ್ ಗುರುವಾಯನಕೆರೆ , ಜಲೀಲ್ ಬೆಳ್ತಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


