ಬೆಂಗಳೂರು:ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 16 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಇಂದು ಮುಂಜಾನೆಯ ವೇಳೆ ನಡೆದಿದೆ.
ಬಸ್ಸಿನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾದ ದುರ್ದೈವಿಗಳು.
ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬಸ್ ಓವರ್ ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ ಅಂತ ಹೇಳಲಾಗುತ್ತಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ.
ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ ಎಂಬುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದು ಬಂದಿದೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

