ಮೂಲ್ಕಿ: ಪತಿಯ ಕಿರುಕುಳ ತಾಳಲಾರದೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ.
ಮೃತ ಮಹಿಳೆಯನ್ನು ಮಡಿವಾಳಮ್ಮ ಎಂದು ಗುರುತಿಸಲಾಗಿದೆ.

ಮೃತ ಮಹಿಳೆಯ ಪತಿ ಬಸವರಾಜ ಪ್ರತೀ ದಿನ ಪತ್ನಿ ಗೆ “ನಿನಗೆ ಮಕ್ಕಳಾಗುತ್ತಿಲ್ಲ, ಎಲ್ಲಿಯಾದರೂ ಹೋಗಿ ಸಾಯಿ’ ಎಂದು ಕಿರುಕುಳ ನೀಡುತ್ತಿದ್ದು, ಇದನ್ನು ಸಹಿಸಲಾರದ ಮಹಿಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬುಧವಾರ ಮಹಿಳೆ ಮನೆಯ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿದ್ದು ಏಳುತ್ತಿಲ್ಲ ಎಂಬ ಮಾಹಿತಿ ತಿಳಿದ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಮೂಲ್ಕಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಡಿ ಪತಿ ಬಸವರಾಜುವನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಘಟನೆ ಕುರಿತು ಮೂಲ್ಕಿ ಇನ್ಸ್ಪೆಕ್ಟರ್ ಮಂಜುನಾಥ್ ಅವರ ಮಾರ್ಗದರ್ಶನದಡಿ ಪಿಎಸ್ಐ ಅನಿತಾ ತನಿಖೆ ನಡೆಸುತ್ತಿದ್ದಾರೆ.


