ಉಳ್ಳಾಲ: ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ತಗುಲಿದ ಘಟನೆ ಜೂನ್ 15 ರ ರಾತ್ರಿ ದೇರಳಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ವೇಣುಗೋಪಾಲ್ ಶೆಟ್ಟಿ ಅವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಇರುವ ಸ್ವಿಚ್ ಬೋರ್ಡಿನಿಂದ ಬೆಂಕಿ ಹೊತ್ತಿಕೊಂಡು ಮೇಲ್ಛಾವಣಿಯತ್ತ ಹರಡತೊಡಗಿತ್ತು. ತಕ್ಷಣವೇ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಪೆಟ್ರೋಲ್ ಬಂಕ್ನಲ್ಲಿದ್ದ ಪರಿಕರಗಳನ್ನು ಬಳಸಿ ಬೆಂಕಿಯನ್ನು ನಂದಿಸಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆಗೆ ಕೈ ಜೋಡಿಸಿದರು.

ಆದರೆ ಅಗ್ನಿಶಾಮಕ ದಳ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಸ್ಥಳೀಯರು ಅಸಹನೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿದರು.ಇದೇ ಸಂಧರ್ಭದಲ್ಲಿ ಕಟ್ಟಡದಲ್ಲಿದ್ದ ಖಾಸಗಿ ಶಿಕ್ಷಣ ಸಂಸ್ಥೆಯ 140 ವಿದ್ಯಾರ್ಥಿನಿಯರನ್ನು ಶಿಕ್ಷಣ ಸಂಸ್ಥೆಯ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


