ಮಂಗಳೂರು : ನಂತೂರಿನ ತಾರೆತೋಟ ಬಳಿ ಕಾರೊಂದು ಪಲ್ಟಿಯಾಗಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೂನ್ 15 ರ ತಡರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29)ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ತಮ್ಮ ಫಿಸಿಯೋಥೆರಪಿ ಪದವಿಯನ್ನು ಪೂರ್ಣಗೊಳಿಸಿ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿದ್ದರು ಎನ್ನಲಾಗಿದೆ.

ನಂತೂರಿನಿಂದ ಪಂಪ್ವೆಲ್ ಕಡೆಗೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಅತಿ ವೇಗ ಮತ್ತು ರಸ್ತೆ ಸ್ಕಿಡ್ ಆದ ಕಾರಣ ಕಾರಿನ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು, ಗಾಡಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಅಮಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಮೃತಪಟ್ಟಿದ್ದಾರೆ. ಕಾರಿನಲ್ಲಿ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.


