ಮೂಡಿಗೆರೆ : ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಜೂನ್ 24ರಂದು ನಡೆದಿದೆ.
ಗಾಯಗೊಂಡ ಕಾಮಿ೯ಕ ನನ್ನು 37 ವರ್ಷದ ದಿನೇಶ್ ಎಂದು ಗುರುತಿಸಲಾಗಿದೆ.


ಮೂಡಿಗೆರೆ ಸಮೀಪದ ಹೆಸಗಲ್ ಗ್ರಾಮದ ದಿನೇಶ್ ಹಾಗೂ ಇತರರು ಮೂರ್ತೇಶ್ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಮಧ್ಯಾಹ್ನ ದ ವೇಳೆ ತೋಟದ ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದ್ದು, ನಡೆದುಕೊಂಡು ಬರುತ್ತಿದ್ದ ದಿನೇಶ್ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ನಂತರ ಕೆಲ ಹೊತ್ತು ಅಲ್ಲಿಯೇ ನಿಂತು ವಾಪಾಸ್ಸಾಗಿದೆ.

ಕಾಡಾನೆ ಎತ್ತಿ ಎಸೆದ ರಭಸಕ್ಕೆ ದಿನೇಶ್ ಅವರ ಬೆನ್ನು, ಕುತ್ತಿಗೆ ಮತ್ತು ತಲೆ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಈ ಸಂದರ್ಭದಲ್ಲಿ ತೋಟದ ಮಾಲೀಕ ಮೂರ್ತೇಶ್ ಮತ್ತು ಇತರೆ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ದಿನೇಶ್ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.



