ಬಂಟ್ವಾಳ: ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಪ್ರಸೂತಿ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗೆ ಶೀಘ್ರವಾಗಿ ಭರ್ತಿಮಾಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕೆ.ಡಿ.ಪಿ.ಸಭೆಯಲ್ಲಿ ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರು ಈ ವಿಚಾರವನ್ನು ಪ್ರಸ್ತಾಪಿಸಿದರು.

ಬಂಟ್ವಾಳ ತಾಲೂಕಿನಲ್ಲಿ ಸುಮಾರು 50% ಮಹಿಳೆಯರು ಹೆರಿಗೆಗೆ ಸರ್ಕಾರಿ ಆಸ್ಪತ್ರೆಯ ಅವಲಂಬಿತರಾಗಿದ್ದಾರೆ. ಆದರೆ ಪ್ರಸಕ್ತ ಪ್ರಸ್ಥುತಕ್ಕೆ ಪ್ರಸೂತಿ ಹಾಗೂ ಅರಿವಳಿಕೆ ತಜ್ಞರ ಹುದ್ದೆ ಖಾಲಿಯಾಗಿದ್ದು, ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಶಾಸಕರು ಹೇಳಿದರು.

ಶಾಸಕರ ಮಾತಿಗೆ ಸ್ಪಂದಿಸಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಒಂದು ತಿಂಗಳೊಳಗೆ ಎರಡು ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದರು.

ಈ ಸಭೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಮತ್ತು ನಿರುದ್ಯೋಗ ಸೃಷ್ಟಿ ಮಾಡಿದ ಮರಳು ಮತ್ತು ಕೆಂಪುಕಲ್ಲಿನ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಒಕ್ಕೊರಲಿನಿಂದ ಆಗ್ರಹ ಮಾಡಿದರು.



