ಬೆಳ್ತಂಗಡಿ: ಗರ್ಭಿಣಿ ಮಹಿಳೆಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮಹಿಳೆ ಕಾರಿನಲ್ಲಿಯೇ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜುಲೈ 1ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಸುನ್ನತ್ರೆ ನಿವಾಸಿ ಇಕ್ಬಾಲ್ ಅವರ ಪತ್ನಿ ತುಂಬು ಗರ್ಭಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿ ನಿಂತುಕೊಂಡಿದ್ದರು. ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಮಹಿಳೆಯನ್ನು ಗಮನಿಸಿ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ಆಗ ದಂಪತಿಯ ಪರಿಸ್ಥಿತಿ ಅರಿತ ಅವರು ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಕೆಲ ಹೊತ್ತಲ್ಲೆ ಸಫಿಯಾ ಅವರು ಕಾರಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಕಾಲದಲ್ಲಿ ತಾಯಿ-ಮಗುವಿನ ಪ್ರಾಣ ಉಳಿಸಿದ ಜಮಾಲ್ ಕರಾಯ ಅವರ ಈ ಮಾನವೀಯ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.



