ಮಂಗಳೂರು: ಶತಮಾನ ಕಂಡ ಕರ್ಣಾಟಕ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ಶಾಖೆಯನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಎಸ್. ಭಟ್ ಖಡಾಖಂಡಿತವಾಗಿ ಹೇಳಿದ್ದು, ಈ ಮೂಲಕ ಗೊಂದಲ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಜು.16ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ಣಾಟಕ ಬ್ಯಾಂಕ್ ಸ್ಥಳಾಂತರ ಆಗುವುದಿಲ್ಲ, ಮಾತ್ರವಲ್ಲದೆ ಬ್ಯಾಂಕಿನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಬ್ಯಾಂಕ್ ಸುದೃಢವಾಗಿದೆ.

ಹಿಂದಿನ ಸಿಇಒ ಮತ್ತು ಎಂಡಿ ಅವರ ಅಧಿಕಾರದ ಅವಧಿಯಲ್ಲಿ ಅವರ ಅನುಕೂಲ ಕಾರಣಕ್ಕೆ ಬೆಂಗಳೂರು ಕೇಂದ್ರೀಕರಿಸಿ ಕಾರ್ಯನಿರ್ವಹಿಸುತ್ತಿದ್ದಿರಬಹುದು. ಆದರೆ ಬ್ಯಾಂಕಿನ ಪ್ರಧಾನ ಕಚೇರಿ ಇಲ್ಲಿಯೇ ಇದೆ, ಇಲ್ಲಿಯೇ ಇರುತ್ತದೆ. ಕರಾವಳಿಯಲ್ಲಿ ಸ್ಥಾಪನೆಯಾದ ಬ್ಯಾಂಕ್ನ ಪ್ರಧಾನ ಕಚೇರಿ ಇಲ್ಲಿಯೇ ಇರಲಿದೆ ಎಂದು ಸ್ಪಷ್ಟಪಡಿಸಿದ್ಧಾರೆ.

ಬ್ಯಾಂಕ್ ವಿಲೀನ ಕುರಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ʼಬ್ಯಾಂಕ್ ವಿಲೀನ ವದಂತಿ ಸತ್ಯಕ್ಕೆ ದೂರವಾಗಿದೆ. ಈ ಬ್ಯಾಂಕಿಗೆ ಶೇ. 61ರಷ್ಟು ಸಾರ್ವಜನಿಕರ ಪ್ರಾತಿನಿಧ್ಯ ಇದೆ. ಹಾಗಾಗಿ ಇದನ್ನು ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಅಥವಾ ಪ್ರಯತ್ನಗಳು ಇಲ್ಲ. ಈ ಬ್ಯಾಂಕಿನ ಮೂಲ ಬಂಡವಾಳ ಸದೃಢವಾಗಿರುವುದರಿಂದ ವಹಿವಾಟು, ಲಾಭಾಂಶಗಳಿಗೇನೂ ತೊಂದರೆ ಆಗಿಲ್ಲ. ಗ್ರಾಹಕರು ಗಾಬರಿಪಡುವ ಅಗತ್ಯ ಇಲ್ಲ ಎಂದು ಭರವಸೆ ನೀಡಿದ್ದಾರೆ.



