ಬಂಟ್ವಾಳ: ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 11ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ.

ನ್ಯಾಯಾಲಯವು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣದಲ್ಲಿ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಬ್ಬರು ಆರೋಪಿಗಳಾದ ತುಂಬೆ ನಿವಾಸಿ ಅಭಿನ್ ರೈ ಹಾಗೂ ಶೃಂಗೇರಿ ನಿವಾಸಿ ರವಿ ಸಂಜಯ್ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ಸತ್ರ ನ್ಯಾಯಾಲಯವು ಜು. 15ರಂದು ತಿರಸ್ಕರಿಸಿತ್ತು.

ಪ್ರಕರಣದ ತನಿಖೆ ಮುಂದುವರಿದ್ದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.


